ಶಕ್ತಿ ನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಇತ್ತೀಚೆಗೆ ನಡೆದ ದ.ಕ.ಜಿಲ್ಲಾ ಮಟ್ಟದ ಈಜು ಹಾಗೂ ಟೇಬಲ್ ಟೇಬಲ್ ಟೆನಿಸ್ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅದ್ಯಕ್ಷರಾದ ಕೆ. ನಾಗಣ್ಣ ಗೌಡ ಅವರು ಆಗಮಿಸಿದರು. ಈಜು ಸ್ಪರ್ದೆಗಳಲ್ಲಿ ಭಾಗವಹಿಸಿದ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು.




ನಂತರ ಮಾತನಾಡಿದ ಅವರು ಶಾಲೆಗಳು ವಿದ್ಯಾರ್ಥಿಗಳಿಗೆ ಪಾಠದ ಜೊತೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತುಕೊಟ್ಟರೆ ಅವರು ನಿರಂತರ ಚಟುವಟಿಕೆಯಿಂದ ಕೂಡಿರುತ್ತಾರೆ. ಇಂದು ಶಕ್ತಿಯಲ್ಲಿ ನಡೆದಿರುವ ಈಜು ಸ್ಪರ್ದೆಯೇ ಇದಕ್ಕೆ ಉದಾಹರಣೆ ಎಂದು ಹೇಳಿದರು. ವಿದ್ಯಾರ್ಥಿಗಳ ಪೋಷಕರು ಅತಿ ಉತ್ಸಾಹದಿಂದ ಮಕ್ಕಳಿಗೆ ಪ್ರೋತ್ಸಾಹ ಕೊಡುತ್ತಾ ಅದಕೋಸ್ಕರ ಇಲ್ಲಿಗೆ ಆಗಮಿಸಿರುವುದು ಅಭಿನಂದನೀಯವಾಗಿದೆ. ನಾವು ಮಕ್ಕಳನ್ನು ಸದಾ ಓದಿನ ಜೊತೆ ಇತರೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು. ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರಾದ ರಾಜೇಶ್ವರಿ ಇವರು ಮಾತನಾಡಿ ಶಕ್ತಿ ಪಪೂ ಕಾಲೇಜಿನಲ್ಲಿ ನಡೆಯುತ್ತಿರುವ ಜಿಲಾ ಮಟ್ಟದ ಸ್ಪರ್ದೆಯಲ್ಲಿ ದ.ಕ. ಜಿಲ್ಲೆಯ ಕೆಲವು ಪ.ಪೂ. ಕಾಲೇಜು ವಿದ್ಯಾರ್ಥಿಗಳು ಈ ಈಜು ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಅಭಿನಂದನೆಯನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಆಸಕ್ತಿಯಿಂದ ಎಲ್ಲರೂ ಭಾಗವಹಿಸುವಂತೆ ಕರೆ ನೀಡಿದರು.
ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ ಸಿ ನಾೖಕ್, ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತಾ ಸೂರಜ್, ವಿದ್ಯಾಭಾರತಿ ಕರ್ನಾಟಕದ ಖೇಲ್ ಖುದ್ ಪ್ರಮುಖ ಕರಣಾಕರ ಹಾಗೂ ಶಾರೀರಿಕ ಶಿಕ್ಷಣ ಪ್ರಮುಖ ಪುರುಷೋತ್ತಮ ಸಮಾರಂಭದಲ್ಲಿ ಉಪಸ್ಥಿತರಿದ್ದರು.

